ಬೆಂಗಳೂರು : ರಾಜ್ಯಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗಿದ್ದು, ಯಾರ ಹೆಸರು ಅಂತಿಮಗೊಳಿಸಬೇಕು ಎಂಬ ಗೊಂದಲ ಕಂಡುಬರುತ್ತಿದೆ.
ರಾಜ್ಯದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಇಂದು ಸೋಮವಾರ ಅಧಿಸೂಚನೆಯೂ ಪ್ರಕಟವಾಗಿದೆ. ಈ ಪೈಕಿ ಮೂರು ಸ್ಥಾನಗಳು ಆಡಳಿತಾರೂಢ ಕಾಂಗ್ರೆಸ್ ಪಾಲಾದರೆ, ಒಂದು ಸ್ಥಾನ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಸಿಗುತ್ತದೆ.
ಈಗಾಗಲೇ ಹಾಲಿ ರಾಜ್ಯಸಭಾ ಸದಸ್ಯರಾಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮರು ಆಯ್ಕೆ ಮಾಡಲು ಜೆಡಿಎಸ್ ಆಸಕ್ತಿ ತೋರಿದೆ. ರಾಜ್ಯ ನಾಯಕರುಗಳ ಜೊತೆಗೆ ಕೇಂದ್ರ ನಾಯಕರ ಮನವೊಲಿಕೆ ಕಸರತ್ತು ಸಹ ಮಾಡಲಾಗುತ್ತಿದೆ. ಮತ್ತೊಂದೆಡೆ ರಾಜ್ಯ ಬಿಜೆಪಿಯು ಇತ್ತೀಚೆಗೆ ನಡೆಸಿದ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ಹೆಸರನ್ನು ರಾಜ್ಯಸಭೆಗೆ ಶಿಫಾರಸು ಮಾಡಿ ಕೇಂದ್ರಕ್ಕೆ ವರದಿ ನೀಡಿದೆ.
