ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಎಚ್ಚರಿಕೆಯಿಂದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.


ನವೆಂಬರ್ ಕ್ರಾಂತಿ, ಮುಖ್ಯಮಂತ್ರಿ ಹುದ್ದೆಯ ಬದಲಾವಣೆಯ ಊಹಾಪೋಹಗಳ ಮಧ್ಯೆ ಗಾಯದ ಮೇಲೆ ಉಪ್ಪು ಸವರಲು ಎಂಬಂತೆ ದಲಿತ ಸಚಿವರು ರ‍್ಯಾಲಿ ನಡೆಸಲು ಯೋಜಿಸಿದ್ದಾರೆ. ಅಹಿಂದ ಸಂಘಟನೆಯ ಸದಸ್ಯರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬೇಕು ಎಂದು ಹೈಕಮಾಂಡ್‌ಗೆ ಸಂದೇಶ ರವಾನಿಸಲು ಸಹಿ ಅಭಿಯಾನವನ್ನು ಪ್ರಾರಂಭಿಸುತ್ತಿದ್ದಾರೆ. ಡಿ ಕೆ ಶಿವಕುಮಾರ್ ನಿಷ್ಠರಾಗಿರುವ ಕೆಲವು ಮೊದಲ ಬಾರಿಗೆ ಶಾಸಕರಾದವರು ಸಿದ್ದರಾಮಯ್ಯ ಪಾಳಯವನ್ನು ಎದುರಿಸಲು ಡಿಕೆಶಿಯವರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಂಬಲಿಸುತ್ತಿಲ್ಲ ಎಂದು ನಿರಾಶೆಗೊಂಡಿದ್ದಾರೆ. ತಮ್ಮ ಆಪ್ತ ವಲಯದಲ್ಲಿ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಈ ಮಧ್ಯೆ, 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಧಿಕಾರ ಹಂಚಿಕೆಯ ಒಪ್ಪಂದದಂತೆ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಶ್ರೀರಕ್ಷಗೆ ನಿಲ್ಲುತ್ತಾರೆ, ತಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಆಶಾವಾದದಲ್ಲಿ ಶಿವಕುಮಾರ್ ಇದ್ದಾರೆ. ಈ ಬಗ್ಗೆ ನಿನ್ನೆ ಪ್ರತಿಕ್ರಿಯೆ ನೀಡಿರುವ ಡಿ ಕೆ ಸುರೇಶ್, ನಮ್ಮಲ್ಲಿ ಆಶಾವಾದ ಇದೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಅದೃಷ್ಟವಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಆಗುವುದಿಲ್ಲ. ಅವರು ಹೈಕಮಾಂಡ್ ಸೂಚನೆಯಂತೆ ಮುಂದಿನ ಹೆಜ್ಜೆ ಇಡುತ್ತಾರೆ ಎಂದರು.


ಸಿದ್ದರಾಮಯ್ಯನವರು 2028 ರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುವುದರಲ್ಲಿ ಮತ್ತು ಚುನಾವಣೆಗಳಲ್ಲಿ ಸ್ಪರ್ಧಿಸುವುದರಲ್ಲಿ ಯಾವುದೇ ತಪ್ಪಿಲ್ಲ, ಅವರು ಚುರುಕಾಗಿದ್ದಾರೆ ಎಂದು ಡಿ ಕೆ ಸುರೇಶ್ ಹೇಳಿದರು. ಎಸ್‌ಸಿ/ಎಸ್‌ಟಿ ಸಚಿವರು ರ್ಯಾಲಿಯನ್ನು ಯೋಜಿಸುತ್ತಿರುವ ಬಗ್ಗೆ, ಇದು ಸ್ವಾಗತಾರ್ಹ ಕ್ರಮವಾಗಿದೆ ಏಕೆಂದರೆ ಇದು ಪಕ್ಷವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.


ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಮುಂದುವರಿಸಲು ಪ್ರಯತ್ನಿಸುತ್ತಿರುವ ಗುಂಪು ಮತ್ತು ದಲಿತ ಮುಖ್ಯಮಂತ್ರಿ ಬಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿರುವ ಬಗ್ಗೆ ಕೇಳಿದಾಗ, ಡಿ ಕೆ ಶಿವಕುಮಾರ್ ವಿವಾದಕ್ಕೆ ಸಿಲುಕದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ. ಅನಗತ್ಯ ವಿಷಯಗಳ ಬಗ್ಗೆ ಮಾತನಾಡುವ ಮೂಲಕ ಅಮೂಲ್ಯ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡಬೇಡಿ ಎಂದಷ್ಟೇ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.


ಈ ಮಧ್ಯೆ, ಮಾಜಿ ಸಚಿವ ಕೆ.ಎನ್. ರಾಜಣ್ಣ ನವೆಂಬರ್ 7 ರಂದು ತುಮಕೂರಿಗೆ ಅಧಿಕೃತ ಭೇಟಿ ನೀಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಭೋಜನ ಕೂಟವನ್ನು ಆಯೋಜಿಸಲು ಮುಂದಾಗಿದ್ದಾರೆ. ರಾಜಣ್ಣ ಅವರು ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಒತ್ತಾಯಿಸುತ್ತಿದ್ದಾರೆ.