ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಗಡುವಿನೊಳಗೆ ಬೆಂಗಳೂರು ಗುಂಡಿಯನ್ನು ಮುಚ್ಚಲಾಗಲಿಲ್ಲ. ಈಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಮಗೆ ತಾವೇ ಹೊಸ ಗಡುವನ್ನು ಹಾಕಿಕೊಂಡಿದೆ. ಆ ದಿನವೂ ಹತ್ತಿರವಿದ್ದು, ಹೊಸ ಗಡುವಿನೊಳಗಾದರೂ, ಗುಂಡಿಮುಕ್ತಿ ಹೊಂದಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
ನಗರದಲ್ಲಿ ಸುಮಾರು 18 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಜಂಕ್ಷನ್ಗಳ ಅಭಿವೃದ್ಧಿಗೆ 100 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.
ನವೆಂಬರ್ 10 ರೊಳಗೆ ನಗರದಲ್ಲಿರುವ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ. ನಗರದ ರಸ್ತೆಗಳ ಗುಂಡಿ ಮುಚ್ಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 31 ರ ಗಡುವು ನೀಡಿದ್ದರು. “1,700 ಕೋಟಿ ವೆಚ್ಚದಲ್ಲಿ 220.68 ಕಿಮೀ ಉದ್ದದ 140 ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, 79.08 ಕಿ.ಮೀ (39 ರಸ್ತೆ) ವೈಟ್ ಟಾಪಿಂಗ್ ಕೆಲಸ ಪೂರ್ಣಗೊಂಡಿದೆ. ಉಳಿದ 101 ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ, ಸುಮಾರು ಹದಿನೇಳು ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಲಾಗಿದೆ. ಮುಖ್ಯ ರಸ್ತೆಗಳಲ್ಲಿನ ಕೆಲಸ ಬಹುತೇಕ ಪೂರ್ಣಗೊಂಡಿದೆ” ಎಂದು ಆಯುಕ್ತರು ಹೇಳಿದ್ದಾರೆ.
ಮುಂದಿನ ಮೂರು ದಿನಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗುವುದು. ಕೆಲವು ವಾರ್ಡ್ ಗಳಲ್ಲಿ ಗುಂಡಿ ಮುಚ್ಚುವ ಕೆಲಸ ಬಾಕಿಯಿದೆ. ಕೆಲವು ಕಡೆ, ನೀರಿನ ಸೋರಿಕೆಯಂತಹ ಮೂಲ ಸಮಸ್ಯೆಗಳು ಎದುರಾಗುತ್ತಿವೆ. ಇದು, ಗುಂಡಿ ಮುಚ್ಚುವ ಕೆಲಸಕ್ಕೆ ವಿಳಂಬಕ್ಕೆ ಕಾರಣವಾಗಿದೆ ಎಂದು ಮಹೇಶ್ವರ ರಾವ್ ಹೇಳಿದ್ದಾರೆ.
1,700 ಕೋಟಿ ವೆಚ್ಚದಲ್ಲಿ 220.68 ಕಿಮೀ ಉದ್ದದ 140 ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, 79.08 ಕಿ.ಮೀ (39 ರಸ್ತೆ) ವೈಟ್ ಟಾಪಿಂಗ್ ಕೆಲಸ ಪೂರ್ಣಗೊಂಡಿದೆ. ಉಳಿದ 101 ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದೆ.
100 ಕೋಟಿ ವೆಚ್ಚದಲ್ಲಿ ‘ಸುರಕ್ಷಾ 75’ ಜಂಕ್ಷನ್ ಸುಧಾರಣಾ ಯೋಜನೆಯ ಶೇ 40ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈಜೀಪುರ ಮೇಲ್ಸೇತುವೆ ಕಾಮಗಾರಿ 2026ರ ಜುಲೈ ಅಂತ್ಯಕ್ಕೆ ಮುಗಿಯಲಿದೆ ಎಂದರು. ಐದು ನಗರ ಪಾಲಿಕೆಗಳ ಕರಡು ವಾರ್ಡ್ ಪುನರ್ ವಿಂಗಡಣೆ ಅಧಿಸೂಚನೆಯನ್ನು ಸೆ.30ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳ ಅವಧಿ ಮುಗಿದಿದೆ. ಪರಿಶೀಲನೆಯ ನಂತರ ಅಂತಿಮ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಹೇಳಿದರು.
